ಉಳ್ಳಾಲ: ಈ ವರ್ಷ ಜೂನ್ ತಿಂಗಳಿಗೂ ಮುನ್ನವೇ ಅಬ್ಬರಿಸಿರುವ ಮಳೆಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಎರಡು ಮನೆಗಳಿಗೆ ಗುಡ್ಡ ಕುಸಿದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ತಾಲೂಕಿನ ಮೊಂಟೆ ಪದವು ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರೇಮ (50) ಎಂದು ಗುರುತಿಸಲಾಗಿದೆ.
ತಡರಾತ್ರಿ ಈ ಘಟನೆ ನಡೆದಿದ್ದು,ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದ ಪರಿಣಾಮ ಈ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಕರಾವಳಿ, ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರುವ ಕಾರಣ, ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಭಕ್ತಾಧಿಗಳಿಗೆ ಸ್ನಾನಘಟ್ಟಕ್ಕೆ ಇಳಿಯದಂತೆ ನಿರ್ಬಂಧಿಸಲಾಗಿದೆ.