ಬೆಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯ ಪರಿಣಾಮ ಕಾರ್ಯಕರ್ತರ ಆಕ್ರೋಶವು ರಾಜ್ಯ ಸರಕಾರಕ್ಕೆ ತಲ್ಲಣ ಉಂಟು ಮಾಡಿದೆ. ಈ ನಿಟ್ಟಿನಲ್ಲಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಮಧ್ಯರಾತ್ರಿ 12.15ಕ್ಕೆ ತುರ್ತು ಸಭೆ ಕರೆದು ಇಂದು (ಜುಲೈ 28)ಕ್ಕೆ ಹಮ್ಮಿಕೊಂಡಿದ್ದ “ಸಾಧನಾ ಸಮಾವೇಶ- ಜನೋತ್ಸವ” ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯು ಬೃಹತ್ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು, ಮೊನ್ನೆ ರಾತ್ರಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಅಂತಿಮ ದರ್ಶನದ ಸಮಯದಲ್ಲಿ ಸಹನೆ ಕಟ್ಟೆಯೊಡೆದ ಕಾರ್ಯಕರ್ತರ ಆಕ್ರೋಶ, ಬಿಜೆಪಿ ವಿರುದ್ಧವೇ ದಿಕ್ಕಾರ, ಕಾರ್ಯಕರ್ತರ ನೋವನ್ನು ಗಮನಿಸಿದ ಬಿಜೆಪಿ ಸರಕಾರ ಈ ನಿರ್ಧಾರಕ್ಕೆ ಬಂದಿದೆ. ಮಧ್ಯರಾತ್ರಿ ತುರ್ತು ಸಭೆ ಬಳಿಕ ಬಸವರಾಜ ಬೊಮ್ಮಾಯಿ ಅವರು ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ 12.30ಕ್ಕೆ ತುರ್ತು ಸುದ್ದಿ ಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಗೂ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಬಿಜೆಪಿಯ ಪ್ರಮುಖ ಮುಖಂಡರಿಗೆ ಜನೋತ್ಸವ ರದ್ದಾದ ಮಾಹಿತಿಯನ್ನು ಮತ್ತು ರಾಜ್ಯದ ಬೆಳವಣಿಗೆಗಳ ಬಗ್ಗೆ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಅವರ ತಾಯಿಯ ಆಕ್ರಂದನ, ಪ್ರವೀಣ್ ನೆಟ್ಟರು ಹತ್ಯೆಯ ನೋವು, ಯುವ ಸಮುದಾಯದ ಭಾವನೆಗಳಿಂದ ಮನಸ್ಸಿಗೆ ಬೇಸರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿದ್ದ ಜನೋತ್ಸವವನ್ನು ರದ್ದುಪಡಿಸಲಾಗಿದೆʼʼ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಅವರ ತಾಯಿಯ ನೋವು, ಆಕ್ರಂದನದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಇಂತಹ ದುಃಖದ ಸಂದರ್ಭದಲ್ಲಿ ಸಾಧನಾ ಸಮಾವೇಶ- ಜನೋತ್ಸವದಲ್ಲಿ ಭಾಗಿಯಾಗಲು ಮನಸ್ಸು ಒಪ್ಪದು. ಹೀಗಾಗಿ ಜನೋತ್ಸವವನ್ನು ಮುಂದೂಡುವ ತೀರ್ಮಾನಕ್ಕೆ ಬಂದಿದ್ದೇನೆʼʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
Advertisement