ಮಾಣೆಯಲ್ಲಿ ಭೀಕರ ರಸ್ತೆ ಅಪಘಾತ: ಮೀನಿನ ಲಾರಿಗೆ ಸ್ಕೂಟಿ ಡಿಕ್ಕಿ, ಎರಡು ಪುಟ್ಟ ಮಕ್ಕಳ ತಂದೆ ದುರ್ಮರಣ
ಮಾಣೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ಇಂದು (ಮೇ 25) ಮೀನಿನ ಲಾರಿ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟಿದ್ದಾರೆ.
ಮೃತ ದುರ್ದೈವಿಯನ್ನು ಮೂಲತಃ ಸುಳ್ಯದವರು ಖಲಂದರ್ ಷಾ ಎಂದು ಗುರುತಿಸಲಾಗಿದೆ. ಇವರು ಸಂಟ್ಯಾರು ಜುಮಾ ಮಸೀದಿಯ ಜಮಾಅತ್ತಿಗೊಳಪಟ್ಟವರಾಗಿದ್ದು, ಪ್ರಸ್ತುತ ಸಂಟ್ಯಾರು ಸಮೀಪದ ಕಲ್ಲರ್ಪೆ ಮಲಾರ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಖಲಂದರ್ ಷಾ ಅವರು ಎರಡು ಪುಟ್ಟ ಹೆಣ್ಣು ಮಕ್ಕಳ ತಂದೆಯಾಗಿದ್ದು, ಇವರ ಅಕಾಲಿಕ ಮರಣದಿಂದ ಕುಟುಂಬವು ಕಣ್ಣೀರಿನಲ್ಲಿ ಮುಳುಗಿದೆ.
ಘಟನೆಯ ವಿವರ:
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮೀನಿನ ಲಾರಿಗೆ ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಅಪ್ಪಳಿಸಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಮೆಡ್ ಲ್ಯಾಂಡ್ (Med Land) ಆಸ್ಪತ್ರೆಗೆ ಕರೆತರಲಾಯಿತಾದರೂ, ಅವರು ಅದಾಗಲೇ ಕೊನೆಯುಸಿರೆಳೆದಿದ್ದಾರೆ.
ಪೊಲೀಸರ ಭೇಟಿ:
ಅಪಘಾತದ ಸ್ಥಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.







