
ಸುಳ್ಯ: ತಾಲೂಕಿನ ಕಸಬಾ ಬೋರುಗುಡ್ಡೆ ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಈ ಹಿಂದೆ ಮನವಿ ಸಲ್ಲಿಸಿದ್ದರು ನಗರ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ಬಾರಿ ನೇರವಾಗಿ ನಗರಾಭಿವೃದ್ಧಿ ಇಲಾಖೆಗೆ ಎಸ್ಡಿಪಿಐ ನಾವೂರು ಬ್ರಾಂಚ್ ಕಾರ್ಯದರ್ಶಿ ಮೊಹಮ್ಮದ್ ಸಾಜಿದ್ ರವರು ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ ಸ್ಥಳೀಯರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಿಂದೆ ಇಂಟರ್ಲಾಕ್ ಅಳವಡಿಸಲಾಗಿದ್ದ ರಸ್ತೆಯು, ಇದೀಗ ಭಾರೀ ವಾಹನಗಳ ಸಂಚಾರದಿಂದಾಗಿ ಸಂಪೂರ್ಣ ಕಿತ್ತುಬಂದಿದ್ದು, ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಈ ರಸ್ತೆಯ ದುಸ್ಥಿತಿಯಿಂದಾಗಿ ಶಾಲಾ ವಿದ್ಯಾರ್ಥಿಗಳು, ವೃದ್ಧರು ಮತ್ತು ಅಂಗವಿಕಲರು ದೈನಂದಿನ ಓಡಾಟಕ್ಕೆ ಭಾರೀ ತೊಂದರೆ ಎದುರಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ, ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಬಗೆಹರಿದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಗರ ಪಂಚಾಯತ್ ಆಡಳಿತವು ತಕ್ಷಣವೇ ಎಚ್ಚೆತ್ತುಕೊಂಡು ರಸ್ತೆಯನ್ನು ದುರಸ್ತಿಗೊಳಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮೊಹಮ್ಮದ್ ಸಾಜಿದ್ ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.







