ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಇತ್ತೀಚೆಗೆ ಕಾಲೇಜು ಷಷ್ಟ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ನಿಜವಾದ ಹೆಮ್ಮೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಪರಿಶ್ರಮ, ತ್ಯಾಗ ಮತ್ತು ಮಾರ್ಗದರ್ಶನವನ್ನು ವಿದ್ಯಾರ್ಥಿಗಳು ಸದಾ ಗೌರವದಿಂದ ಸ್ಮರಿಸಬೇಕು. ಶಿಕ್ಷಕರ ಮೇಲಿನ ಗೌರವವು ಒಂದು ದಿನಕ್ಕೆ ಸೀಮಿತವಾಗದೆ ಸದಾ ಮುಂದುವರಿಯಬೇಕು ಎಂದು ಹೇಳಿದರು.
ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಧರ ವಿ, ಐಕ್ಯೂಎಸಿ ಸಂಚಾಲಕಿ ಡಾ. ಮಮತಾ , ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಹಾಗೂ ಬೋಧಕ- ಬೋಧಕೇತರ ವೃಂದದವರು ರೆಡ್ ಕ್ರಾಸ್ ನಾಯಕರಾದ ಸಿಂಚನಾ, ಸೃಜನ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ರೆಡ್ ಕ್ರಾಸ್ ವಿದ್ಯಾರ್ಥಿಗಳು ಬೋಧಕ- ಬೋಧಕೇತರ ವೃಂದದವರಿಗೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ನಡೆಸಿಕೊಟ್ಟರು.
ಸ್ಪರ್ಥೆಯಲ್ಲಿ ವಿಜೇತರಾದವರಿಗೆ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಧರ ವಿ ಬಹುಮಾನ ವಿತರಿಸಿದರು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ “ಶಿಕ್ಷಕರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾದ ಆಚರಣೆಯಲ್ಲ; ವಿದ್ಯಾರ್ಥಿಗಳ ಮನದಲ್ಲಿ ಶಿಕ್ಷಕರ ಮೇಲಿನ ಗೌರವ, ಕೃತಜ್ಞತೆ ಮತ್ತು ಆದರದ ಭಾವನೆಗಳು ಪ್ರತಿದಿನವೂ ಮೂಡಿಬರಬೇಕು ಎಂಬ ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ” ಎಂದರು. ರೆಡ್ ಕ್ರಾಸ್ ಸದಸ್ಯರಾದ ಕವಿನಾ ಸ್ವಾಗತಿಸಿ, ಸುಹಾನಾ ವಂದಿಸಿ, ನಮ್ರತಾ ಕೆ. ಎನ್.ನಿರೂಪಿಸಿದರು.
ಯುವ ರೆಡ್ ಕ್ರಾಸ್ ಸ್ವಯಂಸೇವಕರು ಕಾರ್ಯಕ್ರಮವನ್ನು ಆಯೋಜಿಸಿದ್ದರು.
